ಸೋಮವಾರ, ಆಗಸ್ಟ್ 10, 2009

ಸಜ್ಜನನ ಸಹಜ ಕೃಷಿ









ರಾಸಾಯನಿಕ ಗೊಬ್ಬರಗಳನ್ನು ಹಾಕಿಯೇ ಬೆಳೆ ಬೆಳೆಯಬೇಕೆಂದು ಪ್ರಯತ್ನಿಸಿ ಕೈಸುಟ್ಟುಕೊಳ್ಳುತ್ತಿರುವ ರೈತರು ಒಂದೆಡೆಯಾದರೆ, ಬೆಳೆ ಸರಿಯಾಗಿ ಬರಲಿಲ್ಲವೆಂದು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರು ಮತ್ತೊಂದೆಡೆ. ಇದಾವುದನ್ನೂ ತಲೆಕೆಡಿಸಿಕೊಳ್ಳದೆ ತನ್ನಷ್ಟಕ್ಕೆ ತಾನು ಸಹಜ ಕೃಷಿ ನಡೆಸುತ್ತ ಮತ್ತಿತರರಿಗೆ ಮಾದರಿಯಾಗಿರುವ ಸಜ್ಜನನಂತಹ ರೈತರು ವಿಭಿನ್ನವೆನಿಸುತ್ತಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗ್ರಾಮದವರಾಗಿರುವ ಎಚ್.ವಿ.ಸಜ್ಜನ್ ಕೃಷಿಯಲ್ಲಿ ಸದಾ ಪ್ರಯೋಗಶೀಲರು. ಜಿಲ್ಲೆ ರಾಜ್ಯಮಟ್ಟದ ತರಬೇತಿಗಳನ್ನು ನೀಡುವಷ್ಟರ ಮಟ್ಟಿಗೆ ಸಾಧನೆ ಮಾಡಿರುವ ಸಜ್ಜನ್ ಕಳೆದ ೧೪ ವರ್ಷಗಳಿಂದ ಸಹಜ ಕೃಷಿ ಅಳವಡಿಸಿಕೊಂಡಿರುವ ರೈತ.
ಕೂಡ್ಲಿಗಿ ತಾಲೂಕು ಕೇಂದ್ರದಿಂದ ೩೫ ಕಿ.ಮೀ ದೂರವಿರುವ ಹುಲಿಕೆರೆ ಪುಟ್ಟ ಗ್ರಾಮ. ಆದರೆ ಇಂದು ಸಜ್ಜನರಂತಹ ರೈತರಿಂದ ಅದು ಮಾದರಿ ಗ್ರಾಮವಾಗಿಯೂ ಬೆಳೆಯುತ್ತಿದೆ. ಕಳೆದ ೧೪ ವರ್ಷಗಳಿಂದ ಯಾವುದೇ ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಔಷಧಿಗಳಿಲ್ಲದೆ ಸಹಜ ಕೃಷಿಯ ಮೂಲಕ, ಸಾಧನೆ ಮಾಡುತ್ತಿರುವ ಸಜ್ಜನ್ ಸದಾ ಕ್ರಿಯಾಶೀಲ ರೈತ. ಖುಷ್ಕಿ ಬೇಸಾಯ ಪದ್ಧತಿಯ್ಲಲಿ ರೈತರಿಗೆ ಹೆಚ್ಚು ಲಾಭ ತಂದುಕೊಡುವ ತೋಟಗಾರಿಕೆ ಬೆಳೆಗಳಾವವು ಎನ್ನುವುದರಿಂದ ಹಿಡಿದು, ಕೊಟ್ಟಿಗೆ ಗೊಬ್ಬರದಿಂದ ಹೇಗೆ ಹೆಚ್ಚು ಇಳುವರಿಯನ್ನು ಪಡೆಯಬಹುದು ಎಂಬುದನ್ನು ಸಾದಿಸಿದ್ದಾರೆ. ಎರೆಹುಳು ಗೊಬ್ಬರ ತಯಾರಿಕೆ, ಅಜೋಲಾ ಎಂಬ ಜಾನುವಾರುಗಳ ಕಡಿಮೆ ವೆಚ್ಚದ ಆಹಾರ, ಜೀವಾಮೃತ ತಯಾರಿಕೆ, ಬೀಜೋಪಚಾರ, ಹೈನುಗಾರಿಕೆಯಲ್ಲಿ ವಿವಿಧೋದ್ದೇಶ ಯೋಜನೆಗಳು, ಜೊತೆಗೆ ರಾಜ್ಯಾದ್ಯಂತ ಸಹಜ ಕೃಷಿಯ ಬಗ್ಗೆ ಪ್ರವಾಸ, ತಜ್ಞರೊಂದಿಗೆ ಚರ್ಚೆ, ರೈತರಿಗೆ ತರಬೇತಿ ನೀಡುವುದು ಹೀಗೆ ಸಜ್ಜನರ ಕಾರ್ಯಕ್ಷೇತ್ರ ವಿಶಾಲವಾದುದು.
ಸಜ್ಜನರ ತೋಟ, ಮನೆಯನ್ನು ನೋಡಿದರೆ ಸಾಕು ಎಂತಹ ನಿರಾಶಾವಾದಿ ರೈತರೂ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಬಯಸುತ್ತಾರೆ. ವಿಶೇಷವೆಂದರೆ ಸಜ್ಜನ್ ಯಾವುದೇ ಯಂತ್ರೋಪಕರಣಗಳನ್ನು ಕೃಷಿಗೆ ಬಳಸದೆ ಸಾಂಪ್ರದಾಯಿಕ ರೀತಿಯಲ್ಲಿಯೇ, ಅತಿಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭ ಪಡೆಯುತ್ತಿರುವುದು. ಕೊಟ್ಟಿಗೆ ಗೊಬ್ಬರವನ್ನು ದ್ರವರೂಪದಲ್ಲಿ, ಘನರೂಪದಲ್ಲಿ ಯಾವ ಯಾವ ಉದ್ದೇಶಕ್ಕೆ ಬಳಸಬಹುದೆಂಬುದಕ್ಕೆ ಅವರ ತೋಟವೇ ಒಂದು ಪ್ರಯೋಗಶಾಲೆಯಾಗಿದೆ. ಕೊಟ್ಟಿಗೆ ಗೊಬ್ಬರದ ದ್ರವವನ್ನು ಮೇಲೆತ್ತಿ ಸಂಗ್ರಹಿಸಲು, ತಾವೇ ತಯಾರಿಸಿದ ರಾಟೆ, ಕಾಲುವೆ, ನಿರುಪಯುಕ್ತ ವಸ್ತುಗಳಿಂದಾದುದು. ರಾಟೆಗೆ ಬಳಸಿದ್ದು ಕಾರಿನ ಹಳೆಯ ಚಕ್ರ, ನೈಲಾನ್ ಹಗ್ಗ, ಸೈಕಲ್ ಟ್ಯೂಬಿನ ರಬ್ಬರ್. ಮೇಲೆತ್ತಿದ ಗೊಬ್ಬರದ ದ್ರವವನ್ನು ಡ್ರಂನಲ್ಲಿ ಸಂಗ್ರಹಿಸಲು ತಾವೇ ಕಾಲುವೆಯನ್ನು ನಿರ್ಮಿಸಿದ್ದಾರೆ. ಸಂಗ್ರಹಗೊಂಡ ಕೊಟ್ಟಿಗೆ ಗೊಬ್ಬರವನ್ನು ಹೊಲಕ್ಕೆ ಬಳಸುತ್ತಾರೆ. ಘನ ರೂಪದ ಕೊಟ್ಟಿಗೆ ಗೊಬ್ಬರವನ್ನು ಎರೆಹುಳು ಸಾಕಣೆಗೆ ಬಳಸುತ್ತಾರೆ. ಹೆಚ್ಚಾದ ಎರೆಹುಳುಗಳನ್ನು ತಮ್ಮ ಗ್ರಾಮ ಹಾಗೂ ಬೇರೆ ಗ್ರಾಮದಲ್ಲೂ ಚರಂಡಿಗಳಲ್ಲಿ ಹಾಕಿದ್ದಾರೆ. ಚರಂಡಿಯಲ್ಲಿ ಸಮೃದ್ಧವಾಗಿ ಬೆಳೆಯುವ ಎರೆಹುಳುಗಳನ್ನು ಬೇರೆ ರೈತರೂ ಉಪಯೋಗಿಸಿಕೊಳ್ಳಬಹುದು. ಎರೆಹುಳು ಗೊಬ್ಬರವನ್ನು ಜರಡಿ ಹಿಡಿಯಲು, ಜರಡಿಯ ಯಂತ್ರವನ್ನು ತಾವೇ ಸಿದ್ಧಗೊಳಿಸಿದ್ದಾರೆ. ಇಲ್ಲೆಲ್ಲ ಬಳಕೆಯಾಗುವುದು ಕೇವಲ ಮಾನವಶಕ್ತಿಯೊಂದೇ, ವಿದ್ಯುತ್‌ನ್ನು ಅವಲಂಬಿಸಿಯೇ ಇಲ್ಲವೆಂಬುದು ಗಮನಿಸಬೇಕಾದ ಸಂಗತಿ. ಮಲ್ಲಿಗೆಯನ್ನು ಮುಖ್ಯಬೆಳೆಯನ್ನಾಗಿಸಿಕೊಂಡಿರುವ ಸಜ್ಜನ್, ಇದೀಗ ಬೆಟ್ಟದ ನೆಲ್ಲಿಕಾಯಿ, ಬೇಲದಹಣ್ಣು, ನೇರಳೆಹಣ್ಣುಗಳನ್ನು ಬೆಳೆಯುತ್ತ್ದಿದಾರೆ. ಭದ್ರಾ ರೈತರ ಕೂಟದಿಂದ ೨ ಬಾರಿ ರಾಜ್ಯಪ್ರಶಸ್ತಿ, ೧ ಬಾರಿ ಜಿಲ್ಲಾಪ್ರಶಸ್ತಿ ಪಡೆದ್ದಿದಾರೆ. ರಾಜ್ಯ, ರಾಷ್ಟ್ರಮಟ್ಟಗಳಲ್ಲಿ ಕೃಷಿ ಪ್ರವಾಸ ಮಾಡಿದ್ದಾರೆ. ಮೈಸೂರಿನಲ್ಲಿ ನಜೀರ್‌ಸಾಬ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ರೈತರಿಗಾಗಿ ನಡೆಸುತ್ತಿರುವ ರಾಜ್ಯ ಮಟ್ಟದ ಸಹಜ ಕೃಷಿ ತರಬೇತಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.
ಇದೆಲ್ಲವನ್ನು ಸಾಧಿಸಲು ಮುಖ್ಯ ಕಾರಣವನ್ನು ಕೇಳಿದರೆ, ಕೊರತೆ, ನೋವು ನನ್ನ ಎಲ್ಲ ಕ್ರಿಯಾಶೀಲತೆಗೆ ಕಾರಣ ಎನ್ನುತ್ತಾರೆ. ಅಂದಹಾಗೆ ಎಚ್.ವಿ.ಸಜ್ಜನ್ ಕನ್ನಡದಲ್ಲಿ ಸ್ನಾತಕೋತ್ತರ ಪದವೀಧರ. ಸಜ್ಜನರನ್ನು ಕಾಣಬೇಕೆನ್ನುವವರು, ಅವರ ಸಹಜ ಕೃಷಿಯ ಬಗ್ಗೆ ಆಸಕ್ತಿಯಿರುವವರುಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ೯೯೦೨೬೬೧೫೯೭




ಚಿತ್ರ, ಲೇಖನ -ಸಿದ್ಧರಾಮ ಹಿರೇಮಠ. ಕೂಡ್ಲಿಗಿ

4 ಕಾಮೆಂಟ್‌ಗಳು:

shivu.k ಹೇಳಿದರು...

ಸರ್,

ಅತ್ಯುತ್ತಮ ಸಾಧನೆ ಸಜ್ಜನ್‍ರಂಥವರು ನಮ್ಮ ದೇಶದ ಆಸ್ತಿ.

kavya H S ಹೇಳಿದರು...

"SAJJANA" entha olle hesaru,avaru maaduttiruva kelasavu kooda. krushiyedegina avara olavu apaara antha avaru maaduttiruva kelasadinda tiliyutte.Thumba kushiyaytu odi.

siddha ಹೇಳಿದರು...

ಶಿವು ಹಾಗೂ ಕಾವ್ಯಾ ಅವರೆ ಪ್ರತಿಕ್ರಿಯೆಗೆ ಧನ್ಯವಾದಗಳು.-ಸಿದ್ಧರಾಮ ಹಿರೇಮಠ. ಕೂಡ್ಲಿಗಿ

Unknown ಹೇಳಿದರು...

ಸಜ್ಜನನ ಕೆಲಸ ಕೂಡ ಅವನ ಹೆಸರಿಂತೆ ಇದೆ......ನಮ್ಮೊಳಗಿನ ವಿಶಿಷ್ಟ ಇವರು